Hebri
ಕುಂದಾಪುರ : ಪಶ್ಚಿಮಘಟ್ಟದ ತಪ್ಪಲಿನ ಪ್ರದೇಶವಾದ ಹೆಬ್ರಿ, ಕುಂದಾಪುರ ಭಾಗದಲ್ಲಿ ಬುಧವಾರ ಬೀಸಿದ ಸುಂಟರಗಾಳಿಗೆ ಅಪಾರ ಪ್ರಮಾಣದ ಕೃಷಿ, ಮನೆ, ದನದ ಕೊಟ್ಟಿಗೆಗಳು, ನೂರಾರು ವಿದ್ಯುತ್ ಕಂಬಗಳಿಗೆ ಹಾನಿಯಾಗಿಯಾಗಿದೆ. ಇದರಿಂದ ಕೋಟ್ಯಂತರ ರೂಪಾಯಿ ನಷ್ಟ ಸಂಭವಿಸಿದೆ.

ಶಂಕರನಾರಾಯಣ ಗ್ರಾ.ಪಂಚಾಯತ್ ವ್ಯಾಪ್ತಿಯಲ್ಲಿ ಎರಡು ಮನೆ, ದನದ ಕೊಟ್ಟಗೆ ಮತ್ತು ಅಪಾರ ಕೃಷಿ ಹಾನಿಗೀಡಾಗಿದೆ. ಕುಳ್ಳುಂಜೆ ಗ್ರಾಮದಲ್ಲೂ ಮನೆಗೆ ಹಾನಿಯಾಗಿದೆ. ಇಲ್ಲಿ ದನದ ಕೊಟ್ಟಿಗೆ ಗಾಳಿಗೆ ಹಾರಿ ಹೋಗಿದ್ದು, ಸಂಪೂರ್ಣ ಹಾನಿಗೊಂಡಿದೆ. 1,000ಕ್ಕೂ ಹೆಚ್ಚು ಅಡಿಕೆ ಮರ, 50ಕ್ಕೂ ಹೆಚ್ಚು ತೆಂಗಿನ ಮರ, ಅಪಾರ ಪ್ರಮಾಣದ ಬಾಳೆ, ಗೇರು ಕಾಳು ಮೆಣಸು ಗಿಡಗಳು ಹಾನಿಗೊಂಡಿವೆ. ಸುಶೀಲಾ ಎಂಬ ಮಹಿಳೆಗೆ ಗಾಯಗಳಾಗಿದ್ದು, ಪುತ್ರಿ ಪ್ರೇಮಾನಾಯ್ಕ ಅವರ ಕಾಲಿಗೆ ಗಂಭೀರ ಸ್ವರೂಪದ ಗಾಯವಾಗಿದೆ ಎಂದು ವರದಿಯಾಗಿದೆ.
ಕುಳ್ಳುಂಜೆ ಗ್ರಾಮದ ಗುಲಾಬಿ ನಾಯ್ಕ ಅವರು ಅಡಿಕೆ ತೋಟವು ಸುಂಟರಗಾಳಿಗೆ ಹಾನಿಗೊಂಡಿವೆ. 600ಕ್ಕೂ ಹೆಚ್ಚು ಅಡಿಕೆ ಮರ ಹಾನಿಗೊಂಡಿವೆ. ಸುಮಾರು 2 ಲಕ್ಷ ರೂ.ಗೂ ಹೆಚ್ಚು ಹಾನಿ ಸಂಭವಿಸಿದೆ.
ಅಮಾಸೆಬೈಲು ಗ್ರಾಮ ಪಂಚಾಯತ್ ವ್ಯಾಪ್ತಿಯ ರಟ್ಟಾಡಿ, ತೆಂಕೂರು, ಹೊರ್ಲಿಜೆಡ್ಡು ನಡಂಬೂರು, ಹಳೆ ಅಮಾಸೆಬೈಲು, ಜಡ್ಡಿನಗದ್ದೆ ಪ್ರದೇಶದಲ್ಲಿ ಬೀಸಿದ ಸುಂಟರಗಾಳಿ ಅಪಾರ ಪ್ರಮಾಣದಲ್ಲಿ ಮನೆಗಳು ಮತ್ತು ಕೃಷಿಗೆ ಹಾನಿ ಸಂಭವಿಸಿದೆ.
ವಿದ್ಯಾರ್ಥಿಗಳಿಂದ ಪ್ರತಿಭಟನೆ : ಹೆಬ್ರಿ ತಾಲೂಕಿಗೆ ಸರಕಾರಿ ಬಸ್ ಕಲ್ಪಿಸುವಂತೆ ಒತ್ತಾಯ
ಉಡುಪಿ : ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಸರಕಾರಿ ಬಸ್ ಸೇವೆ ಕಲ್ಪಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಹೆಬ್ರಿ ತಾಲೂಕು ಕಚೇರಿ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಿದರು.
ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಸರಕಾರಿ ಬಸ್ ಸೇವೆಗಳ ಸಮಸ್ಯೆ ಇದೆ. ಸರಿಯಾದ ಸಮಯಕ್ಕೆ ಬಸ್ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳು, ಸಾರ್ವಜನಿಕರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಬೆಳಿಗ್ಗೆ ಹಾಗೂ ಸಂಜೆಯ ವೇಳೆಗಾದರೂ ಸರಕಾರಿ ಬಸ್ಗಳ ಸೇವೆಯನ್ನು ನಮ್ಮ ತಾಲೂಕಿಗೆ ನೀಡಿ ಎಂದು ವಿದ್ಯಾರ್ಥಿಗಳು ಒತ್ತಾಯಿಸಿದರು.
ತಾಲೂಕು ಕಚೇರಿಯ ಮುಂಭಾಗದಲ್ಲಿ ಬೇಡಿಕೆ ಮುಂದಿಟ್ಟು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಸರಕಾರಿ ಬಸ್ ಸೇವೆ ನೀಡಿ ಸಹಕರಿಸುವಂತೆ ಎಂದು ಮನವಿ ಮಾಡಿದರು.
ಜಿಲ್ಲೆಯಲ್ಲಿ ಮೂರು ಹೊಸ ಕೈಗಾರಿಕಾ ಪ್ರದೇಶಗಳ ನಿರ್ಮಾಣ : ಜಿಲ್ಲಾಧಿಕಾರಿ ವಿದ್ಯಾಕುಮಾರಿ
ಉಡುಪಿ : ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಪ್ರದೇಶಗಳ ನಿರ್ಮಾಣಕ್ಕೆ ಗುರುತಿಸಿರುವ ಶಿವಪುರದ ಕೆರೆಬೆಟ್ಟು, ಕಾರ್ಕಳದ ನಿಟ್ಟೆ ಹಾಗೂ ಬ್ರಹ್ಮಾವರದ ಉಳ್ಳೂರು ಪ್ರದೇಶ ವ್ಯಾಪ್ತಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅವರು ಭೂಸ್ವಾಧೀನ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೈಗಾರಿಕಾ ಸ್ಪಂದನ ಸಮಿತಿ ಸಭೆ, ಕ್ಲಸ್ಟರ್ ಸಮಿತಿ ಸಭೆ, ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ, ಜಿಲ್ಲಾ ಮಟ್ಟದ ರಫ್ತು ಉತ್ತೇಜನಾ ಸಮಿತಿ ಸಭೆ ಹಾಗೂ ಪ್ರಧಾನಮಂತ್ರಿಗಳ ಉದ್ಯೋಗ ಸೃಜನಾ ಯೋಜನೆಯ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಪ್ರದೇಶಗಳನ್ನು ನಿರ್ಮಿಸಿ, ಉದ್ಯೋಗಗಳನ್ನು ಸೃಷ್ಟಿಸುವ ಮೂಲಕ ಸ್ಥಳೀಯ ಜನರಿಗೆ ಉದ್ಯೋಗ ಲಭಿಸಬೇಕೆಂಬ ಆಶಯದೊಂದಿಗೆ ಹೆಬ್ರಿ ತಾಲೂಕಿನ ಶಿವಪುರ ಹಾಗೂ ಕೆರೆಬೆಟ್ಟು ಗ್ರಾಮಗಳಲ್ಲಿ 113.59 ಎಕ್ರೆ, ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ 50.42 ಎಕ್ರೆ ಹಾಗೂ ಬ್ರಹ್ಮಾವರ ತಾಲೂಕಿನ ಉಳ್ಳೂರಿನಲ್ಲಿ 101.19 ಎಕರೆ ಜಮೀನಿನ ಭೂ ಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ ಕೆಐಎಡಿಬಿಗೆ ಹಸ್ತಾಂತರಿಸಬೇಕು ಎಂದು ಅವರು ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಸಣ್ಣ ಕೈಗಾರಿಕೆ ಹಾಗೂ ಮದ್ಯಮ ಕೈಗಾರಿಕೆಗಳಲ್ಲಿ ಡಾ. ಸರೋಜಿನಿ ಮಹಿಷಿ ವರದಿಯಂತೆ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು. ಕಳೆದ ಮಾರ್ಚ್ ವೇಳೆಗೆ ಜಿಲ್ಲೆಯ 21ಕ್ಕೂ ಹೆಚ್ಚು ಕೈಗಾರಿಕೆಗಳಲ್ಲಿ ಪ್ರಗತಿ ಕಂಡು ಬಂದಿಲ್ಲ. ಕೇವಲ ಡಿ ಗ್ರೂಪ್ ಹುದ್ದೆಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತಿದೆ. ಎಲ್ಲಾ ಹುದ್ದೆಗಳಲ್ಲಿಯೂ ಸ್ಥಳೀಯರ ನೇಮಕಾತಿಗೆ ಅವಕಾಶ ಮಾಡಿಕೊಡಬೇಕು. ನೇಮಕಾತಿಗೆ ಸಂಬಂಧಪಟ್ಟ ಸೂಕ್ತ ದಾಖಲೆಗಳನ್ನು ನಿರ್ವಹಣೆ ಮಾಡಬೇಕು ಎಂದವರು ಸೂಚನೆ ನೀಡಿದರು.
ಚಾರ್ಜಿಗೆ ಇರಿಸಿದ್ದ ಎಲೆಕ್ಟ್ರಿಕ್ ಬೈಕಿನ ಬ್ಯಾಟರಿ ಸ್ಫೋಟ : ಅಪಾರ ಪ್ರಮಾಣದ ಹಾನಿ
ಹೆಬ್ರಿ : ಚಾರ್ಜಿಗೆ ಇರಿಸಿದ್ದ ಎಲೆಕ್ಟ್ರಿಕ್ ಬೈಕಿನ ಬ್ಯಾಟರಿ ಸ್ಫೋಟಗೊಂಡ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಚಾರ ಸಮೀಪ ಸಂಭವಿಸಿದೆ. ಇಲ್ಲಿನ ಬಾಡಿಗೆ ರೂಮಿನಲ್ಲಿ ಇರುವ ವ್ಯಕ್ತಿಯೊಬ್ಬರು ಎಲೆಕ್ಟ್ರಿಕ್ ಬೈಕಿನ ಬ್ಯಾಟರಿಯನ್ನು ಮನೆಯ ಒಳಗೆ ಚಾರ್ಜಿಗೆ ಇಟ್ಟಿದ್ದರು. ಈ ಬ್ಯಾಟರಿ ಅರ್ಧ ಗಂಟೆ ಸಮಯದಲ್ಲಿ ಸ್ಫೋಟಗೊಂಡಿದ್ದು ಮನೆಯಲ್ಲಿ ಆ ಸಂದರ್ಭ ಒಳಗೆ ಯಾರೂ ಇಲ್ಲದೆ ಇದ್ದ ಕಾರಣ ಯಾವುದೇ ಜೀವ ಹಾನಿ ಸಂಭವಿಸಿಲ್ಲ. ಮನೆಯೊಳಗಿದ್ದ ಬಟ್ಟೆಬರೆ, ಬ್ಯಾಟರಿ ಹಾಗೂ ದಿನ ಬಳಕೆಯ ಹಲವಾರು ವಸ್ತುಗಳು ಸುಟ್ಟು ಹೋಗಿವೆ. ಬ್ಯಾಟರಿ ಸ್ಪೋಟಗೊಂಡ ಈ ಪ್ರಕರಣ ಮನೆಯವರ ಆತಂಕಕ್ಕೆ ಕಾರಣವಾಗಿದೆ.
ಹೆಬ್ರಿ : ಬೈಕ್ಗೆ ಕಾರು ಡಿಕ್ಕಿಯಾದ ಪರಿಣಾಮ ಸವಾರ ಮೃತಪಟ್ಟ ಘಟನೆ ವರಂಗ ಗ್ರಾಮದಲ್ಲಿ ಸಂಭವಿಸಿದೆ.

ಪಳ್ಳಿ ಗ್ರಾಮದ ವಿಶ್ವನಾಥ ಎಂಬವರು ಮೃತ ದುರ್ದೈವಿ. ಇವರು ರವಿ ಎಂಬವರನ್ನು ಸಹ ಸವಾರನಾಗಿ ಕುಳ್ಳಿರಿಸಿಕೊಂಡು ಹೆಬ್ರಿಯಿಂದ ಅಜೆಕಾರು ಕಡೆಗೆ ಬರುತ್ತಿರುವಾಗ ವರಂಗ ಗ್ರಾಮದ ಸೇತುವೆಯಿಂದ ಸ್ವಲ್ಪ ಮುಂದೆ ತಲುಪುವಾಗ ಅಜೆಕಾರು ಕಡೆಯಿಂದ ಹೆಬ್ರಿ ಕಡೆಗೆ ಸಾಗುತ್ತಿದ್ದ ಆಲ್ಟೋ ಕಾರು ಡಿಕ್ಕಿಯಾಗಿದೆ. ಪರಿಣಾಮವಾಗಿ ಸವರಾರಿಬ್ಬರು ರಸ್ತೆಗೆ ಬಿದ್ದು, ಗಾಯಗೊಂಡಿದ್ದರು. ವಿಶ್ವನಾಥ ಅವರು ತೀವ್ರ ಸ್ವರೂಪದಲ್ಲಿ ಗಾಯಗೊಂಡಿದ್ದು, ಹೆಬ್ರಿ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ವೈದ್ಯರು ಪರೀಕ್ಷಿಸಿ ವಿಶ್ವನಾಥ ಅವರು ದಾರಿ ಮಧ್ಯೆಯೇ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ತ್ರೇಸಿಯಮ್ಮ ಎಂಬವರೂ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.