ಉಡುಪಿ : ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಸಹಿತ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಮಲ್ಪೆ ಬಂದರು ಪ್ರದೇಶಕ್ಕೆ ಭೇಟಿ ನೀಡಿ, ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಬಂದರು ಸ್ವಚ್ಛತೆ ಹಾಗೂ ಭದ್ರತೆ ಸಹಿತ ಹಲವು ವಿಷಯಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಹಾಗೆಯೇ ಬಂದರು ವ್ಯಾಪ್ತಿಯಲ್ಲಿ ತುರ್ತಾಗಿ ಆಗಬೇಕಿರುವ ಕೆಲವು ವಿಷಯಗಳ ಬಗ್ಗೆ ಅಧಿಕಾರಿಗಳಿಗೆ ಮತ್ತು ಗುತ್ತಿಗೆ ಪಡೆದ ಸಂಸ್ಥೆಗೆ ಸೂಚನೆ ನೀಡಿದರು. ಮಲ್ಪೆ ಮೀನುಗಾರರ ಸಂಘದ ಪದಾಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದು, ತಮ್ಮ ಕೆಲವು ಮನವಿಯನ್ನು ಜಿಲ್ಲಾಧಿಕಾರಿಗಳ ಮುಂದಿಟ್ಟರು.
ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಮಾತನಾಡಿ, ಬಂದರು ಸ್ವಚ್ಛತೆ ಹಾಗೂ ಭದ್ರತೆಗೆ ವಿಶೇಷ ಗಮನ ನೀಡಲು ಗುತ್ತಿಗೆ ಪಡೆದ ಸಂಸ್ಥೆಗೆ ನಿರ್ದೇಶನ ನೀಡಿದ್ದೇವೆ. ಕೊಳಚೆ ನೀರು ಹರಿಯುವ ತೋಡುಗಳ ಸ್ವಚ್ಛತೆಗೂ ಸೂಚಿಸಿದ್ದೇವೆ. ಬಂದರು ಒಳಭಾಗದಲ್ಲಿ ಕೆಲವು ಅನಧಿಕೃತ ಗೂಡಂಗಡಿಗಳನ್ನು ತೆರೆಯಲಾಗಿದೆ. ಇದರಿಂದ ವಾಹನ ಸಂಚಾರಕ್ಕೂ ಸಮಸ್ಯೆಯಾಗುತ್ತಿದೆ ಎಂದರು.
ಜಿಪಂ ಸಿಇಒ ಪ್ರತೀಕ್ ಬಾಯಲ್, ಎಸ್ಪಿ ಡಾ| ಅರುಣ್ ಕೆ., ಬಂದರು ಇಲಾಖೆಯ ಉಪ ನಿರ್ದೇಶಕಿ ಸವಿತಾ ಖಾದ್ರಿ, ಮಲ್ಪೆ ಮಿನುಗಾರರ ಸಂಘದ ಅಧ್ಯಕ್ಷ ದಯಾನಂದ ಕೆ. ಸುವರ್ಣ ಮತ್ತು ನಗರಸಭೆ ಅಧಿಕಾರಿಗಳು ಉಪಸ್ಥಿತರಿದ್ದರು.