ಆಧುನಿಕತೆ ಯಕ್ಷಗಾನ ಕಲೆಗೆ ಮಾರಕವಾಗಿಲ್ಲ : ಡಾ.ನೀ.ಬೀ.ವಿಜಯ ಬಲ್ಲಾಳ್

ಉಡುಪಿ : ಯಕ್ಷಗಾನ ಕಲೆ ಎಲ್ಲಾ ಏರುಪೇರುಗಳನ್ನು ಎದುರಿಸಿದರೂ ಗಟ್ಟಿಯಾಗಿ ಬೆಳೆದು ನಿಂತಿದೆ. ಹವ್ಯಾಸಿ ಬಳಗ, ವೃತ್ತಿ ಮೇಳ ಕಲಾವಿದರು ಒಟ್ಟು ಸೇರಿ ಈ ಕಲೆಯನ್ನು ಬೆಳೆಸಿದ್ದಾರೆ. ಮೊಬೈಲ್ ಯುಗದಲ್ಲೂ ಯಕ್ಷಗಾನಕ್ಕೆ ತನ್ನದೇ ಆದ ಪ್ರೇಕ್ಷಕ ವೃಂದವಿರುವುದು ಈ ಕಲೆಯ ಉಳಿವು ಬೆಳವಣಿಗೆಗೆ ಪೂರಕವಾಗಿದೆ ಎಂದು ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ. ನಿ. ಬೀ. ವಿಜಯ ಬಲ್ಲಾಳ್ ಹೇಳಿದರು.

ಅವರು ಭಾನುವಾರ ಕೊಡವೂರು ಶಂಕರ ನಾರಾಯಣ ದೇವಳದ ವಸಂತ ಮಂಟಪದಲ್ಲಿ ನಡೆದ ಯಕ್ಷ ಆರಾಧನಾ ಕಿದಿಯೂರು ಟ್ರಸ್ಟ್ನ ದ್ವಿತೀಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು.

ಜನಾಕರ್ಷಣೆಗಾಗಿ ಕೆಲವರು ಯಕ್ಷಗಾನದಲ್ಲಿ ಕೆಲವೊಂದು ಬದಲಾವಣೆಗಳನ್ನು ತಂದರೂ, ಜನ ಸ್ವೀಕರಿಸಿಲ್ಲ. ಹೀಗಾಗಿ ಪರಂಪರಾಗತ ಯಕ್ಷಗಾನ ಕಲೆಗೆ ಅಳಿವಿಲ್ಲ. ಇದು ಈ ಕಲೆಯ ಶ್ರೇಷ್ಠತೆ. ಇದು ನೂರಾರು ಮಂದಿಯ ಜೀವಾನಾಧಾರವಾಗಿರುವುದು ಹೌದು. ಪ್ರಸ್ತುತ ಕಲಾವಿದ ಜನಾರ್ದನ ಆಚಾರ್ಯ ಅವರ ಮಕ್ಕಳಾದ ಕೆ.ಜೆ.ಗಣೇಶ್, ಕೆ.ಜೆ.ಕೃಷ್ಣ ಹಾಗೂ ಕೆ.ಜೆ.ಸುಧೀಂದ್ರ ಸಹೋದರರು ಯಕ್ಷಗಾನ ಕಲೆಯನ್ನು ಮಕ್ಕಳಿಗೆ ದಾಟಿಸುತ್ತಿರುವುದು ಶ್ಲಾಘನೀಯ ಎಂದರು.

ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರು ಮಾತನಾಡಿ, ಯಕ್ಷಗಾನದಂತಹ ಕಲೆ ಪೀಳಿಗೆಯಿಂದ ಪೀಳಿಗೆಗೆ ದಾಟುತ್ತಿರುವುದಕ್ಕೆ ಈ ವೇದಿಕೆ ಸಾಕ್ಷಿಯಾಗಿದೆ. ಯಕ್ಷಗಾನ ಕಲಾವಿದರಿಗೆ ಇಂದು ಉತ್ತಮ ಸಂಭಾವನೆ, ಪ್ರೋತ್ಸಾಹ ಸಿಗುತ್ತಿದೆ. ಈ ಸಂದರ್ಭದಲ್ಲಿ ಕಲಾವಿದರು ಮೈಮರೆಯಬಾರದು. ತಮ್ಮ ಪಾತ್ರದ ಘನತೆಗೆ ತಕ್ಕಂತೆ ಹಾವಭಾವ, ಮಾತುಗಳನ್ನಾಡಬೇಕು. ಈ ನಿಟ್ಟಿನಲ್ಲಿ ಕೆ.ಜೆ.ಗಣೇಶ್ ಸಹೋದರರು ತಮ್ಮ ಆರಾಧನಾ ಟ್ರಸ್ಟ್ ಮೂಲಕ ಯಕ್ಷಗಾನ ಕಲೆಯನ್ನು ಸಾಂಪ್ರಾದಾಯಿಕವಾಗಿ ಬೆಳೆಸುತ್ತಿರುವುದು ಸಂತೋಷ ತಂದಿದೆ ಎಂದರು.

ಯಕ್ಷ ಸಂಘಟಕ ಭುವನಪ್ರಸಾದ್ ಹೆಗ್ಡೆ ಮಾತನಾಡಿ, ಆಂಗಿಕ, ವಾಚಿಕ ಮೊದಲಾದ ಚತುರ್ವಿಧ ಅಭಿನಯಗಳಿಂದ ಕೂಡಿದ ಯಕ್ಷಗಾನ ಜಗತ್ತಿನ ಯಾವುದೇ ಕಲಾಪ್ರಕಾರವನ್ನು ಮೀರಿಸಬಲ್ಲದು. ಗಾಯನ, ವಾದನ, ನರ್ತನ, ವೇಷಭೂಷಣ, ಸಂಭಾಷಣಾ ಮೊದಲಾದವುಗಳಿಂದ ಕೂಡಿರುವುದು ಯಕ್ಷಗಾನ. ಇಂತಹ ಕಲೆಯನ್ನು ಕೆ.ಜೆ.ಗಣೇಶ್ ಆಚಾರ್ಯ ಸಹೋದರರು ಇದೀಗ ಮೂರನೇ ಪೀಳಿಗೆಗೆ ದಾಟಿಸುತ್ತಿರುವುದು ಅಭಿನಂದನೀಯ ಎಂದರು.

ಕಾರ್ಯಕ್ರಮದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಯಕ್ಷಗಾನ ಗುರು ಪ್ರಭಾಕರ ಆಚಾರ್ಯ ಇಂದ್ರಾಳಿ ಅವರು ಸಂದರ್ಭೋಚಿತವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಯಕ್ಷಗಾನ ಗುರು ಪ್ರಭಾಕರ ಆಚಾರ್ಯ ಇಂದ್ರಾಳಿ ಅವರಿಗೆ ‘ಯಕ್ಷ ಆರಾಧನಾ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಯಕ್ಷ ಆರಾಧನಾ ಕಿದಿಯೂರು ಟ್ರಸ್ಟ್‌ನ ಟ್ರಸ್ಟಿಗಳಾದ ಕೆ.ಜೆ.ಗಣೇಶ್, ಕೆ.ಜೆ.ಕೃಷ್ಣ ಹಾಗೂ ಕೆ.ಜೆ.ಸುಧೀಂದ್ರ ಮತ್ತಿತರರು ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ಬಳಿಕ ಟ್ರಸ್ಟ್‌ನಿಂದ ಶಿಕ್ಷಣ ಪಡೆದ ಸದಸ್ಯರಿಂದ ‘ಶಿವ ಪಂಚಾಕ್ಷರಿ ಮಹಿಮೆ’ ಯಕ್ಷಗಾನ ಪ್ರಸಂಗದ ಪ್ರದರ್ಶನ ನಡೆಯಿತು.

Related posts

ಮೂಡಲಪಾಯ ಯಕ್ಷಗಾನದ ಅಭ್ಯುದಯವನ್ನು ಬೆಂಬಲಿಸಲು ಅಕಾಡೆಮಿ ಬದ್ಧವಾಗಿದೆ : ಡಾ. ತಲ್ಲೂರು

National Fame Award of India Books of Award – Sushanth Brahmavar

ಕರವೇ ಕಾಪು ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ