ರಾಹುಲ್ ಗಾಂಧಿ ಕುರಿತು ಪ್ರಚೋದನಕಾರಿ ಹೇಳಿಕೆ : ಶಾಸಕ ಭರತ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು ಮಂಜೂರು

ಬೆಂಗಳೂರು : ಪ್ರತಿಭಟನೆ ವೇಳೆ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭರತ್ ಶೆಟ್ಟಿ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ನಿರೀಕ್ಷಣಾ ಜಾಮೀನು ಕೋರಿ ಭರತ್ ಶೆಟ್ಟಿ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿ, ಆದೇಶ ನೀಡಿದೆ.

ಕಾಂಗ್ರೆಸ್ ಕಾರ್ಯಕರ್ತ ಅನಿಲ್ ಕುಮಾರ್ ನೀಡಿದ ದೂರಿನ ಮೇರೆಗೆ ಶಾಸಕ ಭರತ್ ಶೆಟ್ಟಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯನ್ನು ಅವಹೇಳನಗೈದು ಪ್ರಚೋದನಕಾರಿ ಭಾಷಣ ಮಾಡಿದ ಬಗ್ಗೆ ಶಾಸಕ ಭರತ್ ಶೆಟ್ಟಿ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಜು.8ರಂದು ಕಾವೂರು ಜಂಕ್ಷನ್‌ನಲ್ಲಿ ಬಿಜೆಪಿ ಆಯೋಜಿಸಿದ್ದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಭರತ್ ಶೆಟ್ಟಿ, ‘ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯನ್ನು ಪಾರ್ಲಿಮೆಂಟ್‌ನಿಂದ ದೂಡಿ ಹೊರಗೆ ಹಾಕಬೇಕು. ರಾಹುಲ್ ಗಾಂಧಿಯ ಕೆನ್ನೆಗೆ ಎರಡು ಬಡಿಯಬೇಕು ಎಂದು ಅನಿಸುತ್ತದೆ. ಅವಾಗ ಮಾತ್ರ ರಾಹುಲ್ ಗಾಂಧಿಗೆ ಬುದ್ಧಿ ಬರುತ್ತದೆʼ ಎಂದು ಹೇಳುವ ಮೂಲಕ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ಹಾಗಾಗಿ ಅವರ ವಿರುದ್ಧ ಕಾನೂನು ಕ್ರಮ ಜರಗಿಸಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತ ಅನಿಲ್ ಒತ್ತಾಯಿಸಿದ್ದರು.

Related posts

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ವರ್ಗಾವಣೆಗೊಳ್ಳುತ್ತಿರುವ ನ್ಯಾಯಾಧೀಶರುಗಳಿಗೆ ವಕೀಲರ ಸಂಘದಿಂದ ಬೀಳ್ಕೊಡುಗೆ

ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿ, ಸಿಬಂದಿ ಕನ್ನಡದಲ್ಲೇ ವ್ಯವಹರಿಸುವ ಕಾನೂನು ಅಗತ್ಯ – ಸಚಿವರಿಗೆ ಸಂಸದ ಕೋಟ ಪತ್ರ