ಮಂಗಳೂರು ಮನಪಾ ವ್ಯಾಪ್ತಿಯ ನಾರಾಯಣ ಗುರು ಮಂದಿರಗಳಿಗೆ ತಲಾ 15,000 ರೂ. ಪ್ರೋತ್ಸಾಹಧನ : ಮೇಯರ್ ಸುಧೀರ್ ಶೆಟ್ಟಿ

ಮಂಗಳೂರು : ಮನುಕುಲಕ್ಕೆ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಸಾರಿದ ಬ್ರಹ್ಮಶ್ರೀ ನಾರಾಯಣಗುರುಗಳ ಜಯಂತಿ ಆಚರಣೆ ಅಂಗವಾಗಿ ಮಹಾನಗರಪಾಲಿಕೆ ವ್ಯಾಪ್ತಿಗೆ ಒಳಪಡುವ ಪ್ರತಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರಗಳಿಗೆ ತಲಾ 15 ಸಾವಿರ ರೂ. ಅನುದಾನ ನೀಡಲಾಗುವುದು ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹೇಳಿದ್ದಾರೆ.

ನಗರದ ಮಹಾನಗರ ಪಾಲಿಕೆ ಮೇಯರ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮನಪಾ ಸುಧಾರಣಾ ತೆರಿಗೆ ಸ್ಥಾಯಿ ಸಮಿತಿ ಅಧ್ಯಕ್ಷ ವರುಣ್ ಚೌಟರ ಸಲಹೆ ಮೇರೆಗೆ ಈ ಯೋಜನೆಯನ್ನು ಬಜೆಟ್ ಘೋಷಣೆ ಮಾಡಿ, ಈ ಬಾರಿ ಅನುಷ್ಠಾನ ಮಾಡಲಾಗುತ್ತಿದೆ. ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆದ ಬಳಿಕ ಕಾರ್ಯಕ್ರಮದ ಖರ್ಚು ವೆಚ್ಚದ ಮಾಹಿತಿಯನ್ನು ಮಹಾನಗರ ಪಾಲಿಕೆಗೆ ಸಲ್ಲಿಕೆ ಮಾಡಿ ಅನುದಾನ ಪಡೆಯಬಹುದು ಎಂದು ಹೇಳಿದರು.

ನಗರದ ನಾರಾಯಣಗುರು ವೃತ್ತದಲ್ಲಿ ಕೆಲವೊಂದು ತಾಂತ್ರಿಕ ಸಮಸ್ಯೆಯಿರುವುದು ನಿಜ. ಈ ವೃತ್ತವನ್ನು ಮುಡಾ ನಿರ್ಮಿಸಿದ್ದು, ಇದನ್ನು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮಂಡಳಿ ತಮ್ಮ ಸುಪರ್ದಿಗೆ ನೀಡುವಂತೆ ಕೇಳಿದೆ. ಶೀಘ್ರದಲ್ಲೇ ಹಸ್ತಾಂತರ ಕಾರ್ಯಕ್ರಮ ನಡೆಯಲಿದೆ. ಆ ಬಳಿಕ ವೃತ್ತವನ್ನು ದೇವಸ್ಥಾನದ ಆಡಳಿತ ಮಂಡಳಿಯೇ ನಿರ್ವಹಣೆ ಮಾಡಲಿದೆ ಎಂದರು.

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಸಿರೀಕರಣಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಜುಲೈ 8ರಂದು ನಗರ ಕುದ್ಮುಲ್ ರಂಗರಾವ್ ಪುರಭವನದಲ್ಲಿ ‘ಹಸಿರೇ ಉಸಿರು’ ಕಾರ್ಯಕ್ರಮ ಆಯೋಜಿಸಲು ಉದ್ದೇಶಿಸಲಾಗಿದೆ. ಸುಮಾರು 7.65 ಲಕ್ಷ ರೂ. ವೆಚ್ಚದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಪ್ರತೀ ವಾರ್ಡ್ ಗಳಿಗೆ ಕನಿಷ್ಠ 100 ಗಿಡದಂತೆ ಒಟ್ಟು 10 ಸಾವಿರ ಗಿಡ ವಿತರಣೆ ಮಾಡಲು ನಿರ್ಧರಿಸಲಾಗಿದೆ. ಮನಪಾ ವ್ಯಾಪ್ತಿಯಲ್ಲಿ 40ಕ್ಕೂ ಅಧಿಕಕ ಓವರ್ ಹೆಡ್ ಟ್ಯಾಂಕ್‌ಗಳಿದ್ದು, ಆಯಾ ವಾರ್ಡ್‌ನ ಓವರ್ ಹೆಡ್ ಟ್ಯಾಂಕ್, ಸರಕಾರಿ ಶಾಲೆ, ಸರಕಾರಿ ಜಾಗಗಳನ್ನು ಗುರುತಿಸಿ ಗಿಡ ನೆಡಲು ತೀರ್ಮಾನಿಸಲಾಗಿದೆ ಎಂದರು.

ಖಾಸಗಿ ಸಂಸ್ಥೆಗಳು ಕೆಲವು ರಸ್ತೆಗಳ ನಿರ್ವಹಣೆಗೆ ಬಿಟ್ಟುಕೊಡುವಂತೆ ಮನವಿ ಮಾಡಿದ್ದು, ಅವರಿಗೆ ಒಂದೊಂದು ರಸ್ತೆಯನ್ನು ಬಿಟ್ಟುಕೊಡುವ ಚಿಂತನೆ ಮಾಡಲಾಗುತ್ತಿದೆ. ಆ ರಸ್ತೆಗಳಲ್ಲಿ ಹಸೀರೀಕಣ ಸೇರಿದಂತೆ ಸಂಪೂರ್ಣ ನಿರ್ವಹಣೆಯನ್ನು ಆ ಸಂಸ್ಥೆಗಳೇ ಮಾಡಲಿದೆ ಎಂದರು.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿದ್ದು ಕನ್ನಡ ಮಾಧ್ಯಮ ಆಯ್ಕೆ ಮಾಡಿ 2024ರ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಶೇ. 90 ಅಥವಾ ಅದಕ್ಕಿಂತ ಹೆಚ್ಚು ಅಂಕ ಗಳಿಸಿರುವ ಸಾಧಕ ಸರಕಾರಿ ಮತ್ತು ಅನುದಾನಿತ ಶಾಲೆಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ತೀರ್ಮಾನಿಸಲಾಗಿದೆ ಎಂದು ಮೇಯರ್ ಸುಧೀರ್ ಶೆಟ್ಟಿ ಹೇಳಿದರು.

ಕನ್ನಡ ಮಾಧ್ಯಮಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಯೋಜನೆಯನ್ನು ರೂಪಿಸಲಾಗಿದೆ. ಮನಪಾ ಬಜೆಟ್ನಲ್ಲಿ 5 ಲಕ್ಷ ರೂ. ಈ ವಿದ್ಯಾರ್ಥಿ ವೇತನಕ್ಕೆ ಮೀಡಲಿಡಲಾಗಿದ್ದು, ಸಾಧಕ ವಿದ್ಯಾರ್ಥಿಗಳು ಅಂಕಪಟ್ಟಿಯ ಪ್ರತಿ, ಆಧಾರ್‌ರ್ಕಾರ್ಡ್ ಮತ್ತು ಶಾಲಾ ಮುಖ್ಯೋಪಾಧ್ಯಾಯರ ದೃಢೀಕರಣ ಪತ್ರವನ್ನು ಜುಲೈ 31ರೊಳಗೆ ಮಹಾನಗರ ಪಾಲಿಕೆಗೆ ಸಲ್ಲಿಸಬೇಕು. ವಿದ್ಯಾರ್ಥಿಗಳ ಸಂಖ್ಯೆಯ ಆಧಾರದಲ್ಲಿ ಪ್ರತಿಯೊಬ್ಬರ ವಿದ್ಯಾರ್ಥಿ ವೇತನ ಮೊತ್ತವನ್ನು ನಿರ್ಧರಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಮನಪಾ ತೆರಿಗೆ ನಿರ್ಧರಣೆ, ಹಣಕಾಸು ಮತ್ತು ಅಪೀಲು ಸ್ಥಾಯಿ ಸಮಿತಿಯ ಅಧ್ಯಕ್ಷ ವರುಣ್ ಚೌಟ, ಪಟ್ಟಣ ಯೋಜನೆ ಮತ್ತು ಸುಧಾರಣೆ ಸ್ಥಾಯಿ ಸಮಿತಿ ಅಧ್ಯಕ್ಷ ಲೋಹಿತ್ ಅಮೀನ್ ಉಪಸ್ಥಿತರಿದ್ದರು.

Related posts

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!

Worlds Fastest Bhagvad Gita Writer Completing 18 Chapters & 700 Verses in Just 5.30 Hours

ಮೀನುಗಾರರ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ-ಹಿಂದೂ ಯುವಸೇನೆ ಮುಖಂಡನ ವಿರುದ್ಧ ಸುಮೊಟೋ ಕೇಸ್