Mullai Mugilan
ವಿಧಾನ ಪರಿಷತ್ ಉಪಚುನಾವಣೆ, ದ.ಕ. ಜಿಲ್ಲಾಧಿಕಾರಿ ಕಚೇರಿ ಸುತ್ತ ನಿಷೇಧಾಜ್ಞೆ ಜಾರಿ : ಮುಲ್ಲೈ ಮುಗಿಲನ್..!
ಮಂಗಳೂರು : ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ವಿಧಾನ ಪರಿಷತ್ ಉಪಚುನಾವಣೆಗೆ ಸಂಬಂಧಿಸಿದ ಪ್ರಕ್ರಿಯೆಗಳು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುಗಮ ಮತ್ತು ಶಾಂತಿಯುತವಾಗಿ ನಡೆಯಬೇಕಿರುವುದರಿಂದ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸೆಪ್ಟೆಂಬರ್ 26ರಿಂದ ಅಕ್ಟೋಬರ್ 7 ಸಂಜೆ 6 ಗಂಟೆಯವರೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳ ಕಚೇರಿ ಆವರಣದ 100 ಮೀಟರ್ ವ್ಯಾಪ್ತಿಯ ಸುತ್ತ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅದೇಶಿಸಿದ್ದಾರೆ.
ನಾಮಪತ್ರ ಸಲ್ಲಿಸುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಸಮಯದಲ್ಲಿ ನಿಷೇಧಿತ 100 ಮೀಟರ್ ಪರಿಧಿಯಲ್ಲಿ ಅಭ್ಯರ್ಥಿಯ ವಾಹನವನ್ನು ಒಳಗೊಂಡಂತೆ ಗರಿಷ್ಠ ಮೂರು ವಾಹನಗಳಿಗೆ ಮಾತ್ರ ಕಚೇರಿಯ ಆವರಣದಲ್ಲಿ ನಿಲುಗಡೆಗೆ ಅನುಮತಿ ನೀಡಲಾಗಿದೆ ಹಾಗೂ ಅಭ್ಯರ್ಥಿಯನ್ನು ಒಳಗೊಂಡಂತೆ ಗರಿಷ್ಠ 5 ಜನರಿಗೆ ಮಾತ್ರ ಚುನಾವಣಾ ಅಧಿಕಾರಿಗಳ ಕಚೇರಿಯನ್ನು ಪ್ರವೇಶಿಸಲು ಅನುಮತಿ ನೀಡಲಾಗಿದೆ.
5 ಮಂದಿಗಿಂತ ಹೆಚ್ಚು ಮಂದಿ ಗುಂಪುಗಾರಿಕೆ ನಡೆಸುವುದು, ಆಯುಧ ಶಸ್ತ್ರಾಸ್ತ್ರಗಳು ಮತ್ತು ಮಾರಕಾಸ್ತ್ರಗಳನ್ನು ಹಿಡಿದು ತಿರುಗುವುದನ್ನು ನಿರ್ಬಂಧಿಸಲಾಗಿದೆ. ನಾಮಪತ್ರ ಸಲ್ಲಿಸುವ ಕೇಂದ್ರದ ನಿಷೇಧಿತ 100 ಮೀಟರ್ ಪರಿಧಿಯಲ್ಲಿ ಚುನಾವಣೆ ನಡೆಯುವ ಕಾರ್ಯದ ಮೇಲೆ ನಿರತರಾಗಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ, ಅಭ್ಯರ್ಥಿಗಳು, ಅನುಮತಿ ಹೊಂದಿದ ರಕ್ಷಣಾ ಇಲಾಖೆಯವರು ಹಾಗೂ ಅನುಮತಿ ಪಡೆದ ಮಾಧ್ಯಮದವರನ್ನು ಹೊರತುಪಡಿಸಿ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.
ಯಾವುದೇ ರೀತಿಯ ಘೋಷಣೆ ಕೂಗುವುದು, ಪಟಾಕಿ ಸಿಡಿಸುವುದು, ಮೆರವಣಿಗೆ ನಡೆಸುವುದು ಹಾಗೂ ಶಾಂತಿ ಶಿಸ್ತು ಪಾಲನೆಗೆ ಭಂಗ ತರುವ ರೀತಿಯಲ್ಲಿ ವರ್ತಿಸುವಂತಿಲ್ಲ. ಯಾವುದೇ ರೀತಿಯ ಸಾರ್ವಜನಿಕ ಆಸ್ತಿಗಳಿಗೆ ವಿರೂಪವನ್ನು ಉಂಟು ಮಾಡುವುದಾಗಲಿ ಅಥವಾ ನಾಶಗೊಳಿಸುವುದಾಗಲಿ ಮಾಡುವಂತಿಲ್ಲ.
ಈ ಆದೇಶವು ಪೊಲೀಸ್ ಅಧಿಕಾರಿಗಳಿಗೆ ಹಾಗೂ ಚುನಾವಣಾ ಕಾರ್ಯನಿರತ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಅನ್ವಯಿಸುವುದಿಲ್ಲ ಎಂದು ಆದೇಶಿಸಲಾಗಿದೆ.
ಪರಿಷತ್ ಚುನಾವಣೆ : ಇಂದು ಅಧಿಸೂಚನೆ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ವಿಧಾನ ಪರಿಷತ್ತು ಉಪ ಚುನಾವಣೆ 2024 ಘೋಷಣೆಯಾಗಿದ್ದು ಮಾದರಿ ನೀತಿಸಂಹಿತೆ ಜಾರಿಯಲ್ಲಿದೆ. ಸೆಪ್ಟೆಂಬರ್ 26ರಂದು ಗುರುವಾರ ಅಧಿಸೂಚನೆ ಪ್ರಕಟವಾಗಲಿದೆ. ಅಕ್ಟೋಬರ್ 3 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ. ಅಕ್ಟೋಬರ್ 4 ರಂದು ನಾಮಪತ್ರಗಳ ಪರಿಶೀಲನೆ, ಅಕ್ಟೋಬರ್ 7ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.
ಮಳೆಗಾಲ ಮುಗಿಯುವವರೆಗೆ ಜಿಲ್ಲೆಯಲ್ಲಿ ಟ್ರಕಿಂಗ್ ನಿಷೇಧ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್
ದಕ್ಷಿಣ ಕನ್ನಡ : ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದ್ದು, ಅದರಲ್ಲೂ ಕರಾವಳಿ ಭಾಗದಲ್ಲಿ ಮಳೆರಾಯ ಅವಾಂತರಗಳನ್ನು ಸೃಷ್ಟಿಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ಮಳೆಗಾಲ ಮುಗಿಯುವವರೆಗೆ ಜಿಲ್ಲೆಯಲ್ಲಿ ಟ್ರೆಕ್ಕಿಂಗ್ ನಿಷೇಧಿಸಿ ಮತ್ತು ಜಿಲ್ಲೆಯ ಜಲ ಪ್ರದೇಶಗಳಲ್ಲೂ ಅನಧಿಕೃತ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.
ಭಾರಿ ಮಳೆಯಿಂದ ಭೂಕುಸಿತ, ಗುಡ್ಡ ಕುಸಿತ, ಮರ ಬೀಳುವ ಸಾಧ್ಯತೆ ಇರುವುದರಿಂದ ಮುಂಜಾಗೃತ ಕ್ರಮವಾಗಿ ಜಿಲ್ಲೆಯ ಶಿಖರಗಳ ಟ್ರೆಕ್ಕಿಂಗ್, ಸಾಹಸ ಚಟುವಟಿಕೆಗಳಿಗೆ ನಿಷೇಧ ಹೇರಲಾಗಿದೆ.
ಜಲಪಾತ, ಝರಿ, ನದಿ, ಸಮುದ್ರ, ಜಲಾಶಯದ ಪ್ರದೇಶಗಳಲ್ಲೂ ನಿರ್ಬಂಧಿಸಿಲಾಗಿದೆ. ಇನ್ನು ಆದೇಶ ಉಲ್ಲಂಘಿಸಿದರೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮದ ಎಚ್ಚರಿಕೆ ನೀಡಲಾಗಿದೆ.
ಸ್ಕೂಟರ್ನಲ್ಲಿ ಸಂಚರಿಸಿ ಡಿಸಿಯಿಂದ ಹೆದ್ದಾರಿ ಪರಿಶೀಲನೆ
ಮಂಗಳೂರು : ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಬುಧವಾರ ಕಲ್ಲಡ್ಕಕ್ಕೆ ಭೇಟಿ ನೀಡಿ ಸ್ಕೂಟರ್ನಲ್ಲಿ ಸಂಚರಿಸಿ ರಾಷ್ಟ್ರೀಯ ಹೆದ್ದಾರಿ ಪರಿಶೀಲನೆ ನಡೆಸಿದರು.
ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆ ನೀರು ಸರಾಗವಾಗಿ ಹರಿಯಲು ಚರಂಡಿ ನಿರ್ಮಾಣ, ಪಾದಾಚಾರಿಗಳು ದಾಟಲು ನಾಲ್ಕು ಕಡೆ ಕಾಲುದಾರಿ ನಿರ್ಮಾಣ, ತ್ಯಾಜ್ಯಗಳನ್ನು ತೆಗೆಯುವುದು ಹಾಗೂ ಹೆದ್ದಾರಿ ಸಮತಟ್ಟುಗೊಳಿಸಲು ನಿರಂತರವಾಗಿ ವೆಟ್ ಮಿಕ್ಸ್ ಹಾಕಲು ಹೆದ್ದಾರಿ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳು ಸ್ವತಃ ಸ್ಕೂಟರ್ನಲ್ಲಿ ಸಂಚರಿಸಿ ಹೆದ್ದಾರಿ ಸ್ಥಿತಿಗತಿ ಖುದ್ದು ವೀಕ್ಷಿಸಿರುವುದು ಗಮನ ಸೆಳೆಯಿತು.